ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಸುದ್ದಿಲ್ಲದೇ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗಾಗಲೇ ಎರಡು ವರ್ಷಗಳು ಪೂರೈಸಿದ್ದು, ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗಳ್ಳಲಿದೆ. ಹೀಗಾಗಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ಶುರುವಾಗಿದ್ದು, ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ದೆಹಲಿಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ದೆಹಲಿಯಲ್ಲಿ ಮಾತನಾಡಿರುವ ಸಲೀಂ ಅಹಮದ್, ನವೆಂಬರ್ ನಲ್ಲಿ ಸಂಪುಟ ಪುನರ್ ರಚನೆಯಾಗಲಿದೆ. ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನ ದಿಂದ ಹೊರ ಬಂದವರಿಗೆ ಪಕ್ಷದ ಕೆಲಸ ವಹಿಸಲಾಗುತ್ತದೆ. ಇನ್ನು ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿದ್ದು, ಎರಡು ದಶಕಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತ ರಿಗೆ ಸಚಿವ ಸ್ಥಾನ ನೀಡಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಮಂತ್ರಿಯಾಗುವ ಆಸೆ ಬಿಚ್ಚಿಟ್ಟರು.
ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗಲಿದೆ ಎನ್ನುವ ಗುಸುಗುಸು ಚರ್ಚೆಗಳು ನಡೆಯುತ್ತಿರುವಾಗಲೇ ಸಲೀಂ ಅಹಮದ್ ಅವರ ಈ ಹೇಳಿಕೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟದಿಂದ ಯಾರಿಗೆ ಕೊಕ್ ಕೊಡುತ್ತಾರೆ ಎನ್ನುವ ಆತಂಕ ಸಚಿವರುಗಳಲ್ಲಿ ಮನೆ ಮಾಡಿದೆ. ಅಂತಿಮವಾಗಿ ಹೈಕಮಾಂಡ್ ಯಾವ ನಿಲುವು ತೆಗೆದುಕೊಳ್ಳುತ್ತೆ ಎನ್ನುವುದೇ ಸದ್ಯದ ಕುತೂಹಲ.