ಮಂಗಳೂರು: ಎಸ್ಐಟಿ ಶೋಧ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಹಾಗೂ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.
ಮನೆ ಶೋಧ ಸಂದರ್ಭ ತಿಮರೋಡಿ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು 2 ತಲವಾರು ಮತ್ತು ಒಂದು ಬಂದೂಕು ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ಎರಡು ನೋಟಿಸ್ ಜಾರಿ ಮಾಡಿದ್ದರು. ಆದರೆ ಮಹೇಶ್ ಶೆಟ್ಟಿ ತಿಮರೋಡಿ ಎರಡು ಬಾರಿಯೂ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.
ಇಂದು ಬೆಳ್ತಂಗಡಿ ಠಾಣೆಯ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ತೆರಳಿ ನೋಟಿಸ್ ಅಂಟಿಸಿದ್ದಾರೆ. ಸೆ.29ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಮನೆಯ ಗೋಡೆಗೆ ನೋಟೀಸ್ ಅಂಟಿಸಲಾಗಿದೆ. ಸೆ.29ಕ್ಕೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಕ್ರಮಕೈಗೊಳ್ಳುವ ಸಾಧ್ಯತೆಯಿದೆ.