Ad image

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್‌ – ರೈತನನ್ನು ಕೊಂದ ಹುಲಿ ಸೆರೆಗೆ ಈಶ್ವರ್‌ ಖಂಡ್ರೆ ಆದೇಶ

Team SanjeMugilu
2 Min Read

ಚಾಮರಾಜನಗರ/ ಬೀದರ್: ನಾಗರಹೊಳೆ  ಮತ್ತು ಬಂಡೀಪುರ  ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ  ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ  ಸೂಚಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿದ್ದಾರೆ. ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಚೌಡಯ್ಯ ನಾಯ್ಕ (35) ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಹುಲಿ ದಾಳಿಯ ನಂತರ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದರು. ಈ ವೇಳೆ ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ, ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು. ಇದರ ಬೆನ್ನಲ್ಲೇ ಮತ್ತೊಂದು ದಾಳಿ ನಡೆದಿದೆ ಎಂದು ಅವರು ಬೇಸರ ಹೊರಹಾಕಿದ್ದಾರೆ.

ಈ ಹಿನ್ನೆಲೆ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

Share This Article