ದಾವಣಗೆರೆ: ದಾವಣಗೆರೆಯಲ್ಲಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಅಧಿಕಾರ ಹಿಡಿಯಬೇಕು ಎನ್ನುವ ಲೆಕ್ಕಾಚಾರ ಹಾಕುತ್ತಿದೆ. ಇತ್ತ ಬಿಜೆಪಿಯಲ್ಲೇ ಟಿಕೆಟ್ಗಾಗಿ ಫೈಟ್ ಜೋರಾಗಿದ್ದು, ಉಪ ಚುನಾವಣೆಯ ಟಿಕೆಟ್ಗಾಗಿ ಲಾಬಿ ಶುರುವಾಗಿದೆ.
ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ಸಮೀಪಿಸುತ್ತಿದ್ದು, ಇದಕ್ಕೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಕೇಸರಿ ನಾಯಕರು ತಮ್ಮ ಪಾರುಪತ್ಯ ಮೆರೆಯಲು ಮುಂದಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಬಿಜೆಪಿ ಗೆಲುವು ಸಾಧಿಸಿಲ್ಲ. ಯಾವಾಗಲೂ ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರೇ ಗೆಲುವು ಸಾಧಿಸುತ್ತಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಅಲ್ಪಸಂಖ್ಯಾತರಿಗೆ ನೀಡಬೇಕು ಎನ್ನುವ ಚರ್ಚೆಗಳು ನಡೆಯುತ್ತಿದ್ದು, ಇದಕ್ಕಾಗಿ ಮುಸ್ಲಿಂ ಸಮುದಾಯದ ಮುಖಂಡರು ಸಭೆಯ ಮೇಲೆ ಸಭೆ ನಡೆಸಿ ಕಾಂಗ್ರೆಸ್ ಹೈಕಮಾಂಡ್ಗೆ ಸಂದೇಶ ರವಾನೆ ಮಾಡುತ್ತಿದ್ದಾರೆ. ಇದರಿಂದ ಈ ಬಾರಿ ಬಿಜೆಪಿ ಗೆಲ್ಲುವ ಲಕ್ಷಣಗಳು ಇವೆ ಎಂದು ಲೆಕ್ಕಾಚಾರ ಮಾಡಿದ ಬಿಜೆಪಿ ನಾಯಕರು ಟಿಕೆಟ್ಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಗೆ ಮನವಿ ಸಲ್ಲಿಸುತ್ತಿದ್ದಾರೆ.
ಇತ್ತ, ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಒಡೆದ ಮನೆಯಾಗಿದ್ದು, ಇತ್ತ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಟೀಮ್ನಿಂದ ಯಶವಂತರಾವ್ ಜಾಧವ್, ಶ್ರೀನಿವಾಸ್ ದಾಸ್ ಕರಿಯಪ್ಪ ಇದ್ದರೆ ಇತ್ತ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಟೀಮ್ನಿಂದ ಕಳೆದ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಜಯ್ ಕುಮಾರ್ಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ.
ಇನ್ನು ಕಾಂಗ್ರೆಸ್ನಲ್ಲಿ ಶಾಮನೂರು ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರೇ ಒತ್ತಾಯಿಸುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲಬೇಕು ಎಂದರೆ ಶಾಮನೂರು ಕುಟುಂಬದವರೇ ಆಗಬೇಕು. ಇಲ್ಲವಾದ್ರೆ ಕಾಂಗ್ರೆಸ್ ಗೆಲುವು ಕಷ್ಟ ಎನ್ನುವ ಮಾತು ಇದೆ. ಆದ್ದರಿಂದ ಶಾಮನೂರು ಕುಟುಂಬಕ್ಕೆ ಟಕ್ಕರ್ ನೀಡಲು ಕೇವಲ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಹಾಗೂ ಅವರ ಕುಟುಂಬಸ್ಥರಿಗೆ ಮಾತ್ರ ಸಾಧ್ಯ. ಈ ಉಪ ಚುನಾವಣೆಯಲ್ಲಿ ಜಿಎಂ ಸಿದ್ದೇಶ್ವರ್ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ನಾಯಕರೇ ಒತ್ತಾಯಿಸುತ್ತಿದ್ದಾರೆ. ಆದರೆ ಜಿಎಂ ಸಿದ್ದೇಶ್ವರ್ ಮಾತ್ರ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಅವರನ್ನೇ ಗೆಲ್ಲಿಸುತ್ತೇನೆ ಎಂದು ಖಡಾಖಂಡಿತವಾಗಿ ಟಿಕೆಟ್ ಬಗ್ಗೆ ಇರುವ ವದಂತಿಯನ್ನು ತಿರಸ್ಕರಿಸಿದ್ದಾರೆ.
ಒಟ್ಟಾರೆಯಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಮತಗಳೇ ಹೆಚ್ಚಿದ್ದು, ಈ ಬಾರಿ ಉಪಚುನಾವಣೆಗೆ ಅಹಿಂದ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಎರಡು ಪಕ್ಷಗಳಲ್ಲಿ ಕೂಗು ಕೇಳಿ ಬರುತ್ತಿದೆ. ಇದರ ನಡುವೆ ಬಿಜೆಪಿಯಲ್ಲಿ ಟಿಕೆಟ್ಗಾಗಿ ಫೈಟ್ ನಡೆಯುತ್ತಿದೆ.
