Ad image

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Team SanjeMugilu
1 Min Read

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್  ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ  ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲ ದಿನಗಳ ಹಿಂದೆ ಸಚಿವ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರದ ದಿನಗಳಲ್ಲಿ ಅವರಿಗೆ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತು. ಮಣಿಪಾಲ್ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ನೀಡಲಾಯಿತಾದರೂ, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ.

ಶ್ವಾಸಕೋಶದ ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಖ್ಯಾತ ವೈದ್ಯ ಡಾ. ವೆಂಕಟಗಿರಿ ಅವರ ನೇತೃತ್ವದ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದೆ. ಸೋಂಕು ತೀವ್ರವಾಗಿರುವುದರಿಂದ ವೈದ್ಯರು ಲಂಗ್ಸ್ ಟ್ರಾನ್ಸ್‌ಪ್ಲಾಂಟೇಷನ್ (ಶ್ವಾಸಕೋಶ ಕಸಿ) ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಸಚಿವ ಸುಧಾಕರ್ ಅವರ ದೇಹವು ಚಿಕಿತ್ಸೆಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಗುರುವಾರ ರಾತ್ರಿ ರಾತ್ರಿ ಸುಮಾರು 9:30ರ ವೇಳೆಗೆ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಕಂಡುಬಂದಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಡಾ. ವೆಂಕಟಗಿರಿ ನೇತೃತ್ವದ ವೈದ್ಯರ ತಂಡವು ನಿರಂತರವಾಗಿ ನಿಗಾ ವಹಿಸಿದೆ.

Share This Article